ಭ್ರಷ್ಟಾಚಾರದ ವಿರುದ್ದ ಹೋರಾಡಲು ಒಂದು ಹರಿತ
ಆಯುಧಕ್ಕಾಗಿ ಉಪವಾಸ ಸತ್ಯಾಗ್ರಹಗಳೆಲ್ಲಾ ನಡೆದುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಇನ್ನು
ಸಿದ್ದವಾಗಿ ಬರಲಿರುವ ಲೋಕಪಾಲ್ ಮಸೂದೆ ಎಷ್ಟು ಹರಿತವೋ ಎಂಬುದನ್ನು ಕಾಲವೇ ಹೇಳಬೇಕು. ಭ್ರಷ್ಟಾಚಾರದ
ವಿರುದ್ದ ಹೋರಾಡಲು ಈಗಾಗಲೇ ಒಂದು (ಸಾಕಷ್ಟು ಹರಿತವಾದ) ಆಯುದವಿದೆಯೆಂದು ಎಷ್ಟು ಜನಕ್ಕೆ
ಗೊತ್ತು?? ಆ ಆಯುದವನ್ನು ಉಪಯೋಗಿಸಿ “ಅಲ್ಲಿ ಎನು
ನಡಿಯುತ್ತಿದೆ?” ಎಂದು ತಿಳಿದುಕೊಂಡು ಭ್ರಷ್ಟಾಚಾರದ ಆಳವನ್ನು
ಕಾಣಬಹುದು ಎಂಬುದು ಎಷ್ಟು ಜನರಿಗೆ ಗೊತ್ತಿದೆ?? ಆ ಆಯುದದ ಹೆಸರು ನಿಮಗೆಲ್ಲಾ ಎಲ್ಲೋ ಕೇಳಿ
ಗೊತ್ತಿರಬಹುದು. ನಿಮ್ಮಲ್ಲಿ ಕೆಲವರಾದರೂ ಅದನ್ನು ಉಪಯೋಗಿಸಿಯೂ ಉಪಯೋಗಿಸಿರಬಹುದು. (ಕಾಮೆಂಟ್
ನಲ್ಲಿ ನಿಮ್ಮ ಅನುಭವ ಹೇಳಬಹುದು). ಅದೇ ಮಾಹಿತಿ ಹಕ್ಕು ಎಂಬ ಕಾನೂನು!!! ಈ ಲೇಖನ ಓದಿದ ಮೇಲೆ
ಒಂದಿಬ್ಬರು ಇದನ್ನು ಉಪಯೋಗಿಸಿ “ಅಲ್ಲಿ ಎನು
ನಡಿಯುತ್ತಿದೆ” ಎಂದು ತಿಳಿದುಕೊಂಡು ಸಂಬಂದಪಟ್ಟವರಿಗೆ ದೂರು ಕೊಟ್ಟರೆ
ಕಾಮಗಾರಿಗಳು ಸ್ವಲ್ಪವಾದರೂ ಸರಿಯಾಗುತ್ತದೆ ಎಂಬುದೇ ನನ್ನ ಆಶಯ ಹಾಗೂ ನನ್ನ ಅನುಭವ. (ಹಾಗೆಲ್ಲಾ
ಕಾಟಾಚಾರಕ್ಕೆ ಏನೇನೋ ಮಾಡದಂತೆ ಸ್ವಲ್ಪವಾದರೂ ಸರಿಯಾಗಿ ಕೆಲಸಮಾಡುವಂತೆ ಚುರುಕು
ಮುಟ್ಟಿಸುತ್ತದೆ).ನಮ್ಮೂರ ರಸ್ತೆಯೊಂದರ ಕಳಪೆ ಡಾಮರ್ ಕಾಮಗಾರಿ ನಡೆದಾಗ - ಈ ಮಾಹಿತಿ ಹಕ್ಕು
ಕಾನೂನು ಉಪಯೋಗಿಸಿ - ಕಾಮಗಾರಿಯ ಎಸ್ಟಿಮೆಶನ್ ತರಿಸಿ - ದೂರು ಕೊಡುತ್ತೇವೆಂದಾಗ –
ಜಿಲ್ಲಾಪಂಚಾಯತ್ ಇಂಜೀನಿಯರ್ ಮತ್ತು ರಸ್ತೆ ಕಂಟ್ರಾಕ್ಟರ್ ನಮ್ಮ ಮನೆಯವರೆಗೂ ಪಾದಬೆಳೆಸಿ –
ತಪ್ಪಾಗಿದ್ದನ್ನು ಒಪ್ಪಿಕೊಂಡು - ರಸ್ತೆಗೆ ಹೊಸದಾಗಿ ಜಲ್ಲಿ ಟಾರಿನ ಒಂದು ಪದರ ಹಾಕಿದ ವಿಷಯವೇ ಈ
ಬ್ಲಾಗಿನ ಬರಹ.
ಟಾರ್ ಹಾಕಿದ್ದರೂ ಕೆಳಗೆ ಕಾಣಿಸುವ ದೊಡ್ಡಜಲ್ಲಿಕಲ್ಲುಗಳು!! |
ಈ
ಮಾಹಿತಿ ಹಕ್ಕು ಕಾನೂನು ಉಪಯೋಗಿಸಿ ಬೇಕಾದ ಮಾಹಿತಿ ಕೇಳಲು ಸಂಬಂದಪಟ್ಟ ಕಛೇರಿಗಳಿಗೆ ಅಲೆಯುವ
ಅವಶ್ಯಕತೆಯಿಲ್ಲ. ಒಂದು ರೂಪಾಯಿಗೆ ಕ್ಸೆರಾಕ್ಸ್ ಅಂಗಡಿಗಳಲ್ಲಿ ಸಿಗುವ ಮಾಹಿತಿ ಹಕ್ಕು ಫಾರಂ
ತಂದು ಮನೆಯಲ್ಲೇ ಕೂತು ಭರ್ತಿಮಾಡಿ ಅಂಚೆ ಕಛೇರಿಯಿಂದ ಹತ್ತು ರೂಪಾಯಿ ಐ.ಪಿ.ಓ ತಂದು ಅದರೊಟ್ಟಿಗಿಟ್ಟು
ಸಂಬಂದಪಟ್ಟ ಇಲಾಖೆಗೆ ಕೊರಿಯರ್ ಮಾಡಿದರೆ ಮುಗಿಯಿತು. ಒಂದು ತಿಂಗಳೊಳಗೇ ನಿಮ್ಮ ಮನೆಗೇ ಉತ್ತರ
ಬರುತ್ತದೆ. (ಹಾಗೆ ಏನೂ ಉತ್ತರವೇ ಕೊಡದಿದ್ದರೆ ಅಧಿಕಾರಿಗಳು ದಿನಕ್ಕೆ ೨೫೦ ರೂಪಾಯಿ ದಂಡ
ತೆರಬೇಕು). ಮಾಹಿತಿ ಹಕ್ಕು ಕಾನೂನನ್ನು ಮೊದಲ ಬಾರಿಗೆ ಬಳಸಿ ಜಿಲ್ಲಾ ಪಂಚಾಯತಿಯಿಂದ ಕಾಮಗಾರಿ
ನಡೆದ ನಮ್ಮ ರಸ್ತೆಯ ಕೆಲಸದ ಎಸ್ಟಿಮೆಶನ್ ತರಿಸಿದೆ. (ಎಸ್ಟಿಮೆಶನ್=ಕಾಮಗಾರಿ ಹೇಗೆ ನಡೆಯಬೇಕು
ಹಾಗೂ ಅದಕ್ಕೆ ಖರ್ಚೆಷ್ಟು ಎಂಬುದರ ಸಂಪೂರ್ಣ ವಿವರ). ಜೊತೆಗೆ ಜಲ್ಲಿ ಡಾಮರ್ ಕಾಮಗಾರಿ
ಕಳಪೆಯಾದರೆ ಯಾರಿಗೆ ದೂರುಕೊಡಬೇಕೆಂಬ ಇನ್ನೊಂದು ಮಾಹಿತಿಯನ್ನೂ ಕೇಳಿದ್ದೆ!!! ಪುಟವೊಂದಕ್ಕೆ ಎರಡು ರುಪಾಯಂತೆ (ಅದನ್ನೂ ಪೋಸ್ಟಲ್
ಐ.ಪಿ.ಓ. ಮೂಲಕ ಕೊರಿಯರ್ ಮಾಡಬೇಕು) ಐದಾರು ಪುಟಗಳ ಮಾಹಿತಿ ಕೈ ತಲುಪಿತು. ಎಸ್ಟಿಮೆಶನ್ ನೋಡಿದರೆ
ನಮಗೆ ಗೊತ್ತಾಗುವುದು ಕಳಪೆ ಕಾಮಗಾರಿಯ ಸಂಪೂರ್ಣ ಮಾಹಿತಿ!!! ಪ್ರತಿ ಹಂತದಲ್ಲೂ ಕಳಪೆ ಹಾಗೂ ಕಾಟಾಚಾರದ
ಕೆಲಸ ನಡೆದಿತ್ತು.
"ಕೆಲವೇ ದಿನದಲ್ಲಿ ಫಸ್ಟ್ ಕ್ಲಾಸ್ ಆಗುವ ರಸ್ತೆಯಂತೆ!!!" |
ಆದರೆ
ಇಂಜೀನಿಯರ್ ಹಾಗೂ ಕಂಟ್ರಾಕ್ಟರ್ ಗೆ ಕಳಿಸಿದ್ದ ಪತ್ರ ಕೆಲಸಮಾಡಿತ್ತು. “ನೀವು ಮಾಡಿದ ರಸ್ತೆ ಕಾಮಗಾರಿ ಕಳಪೆಯಾಗಿದೆಯೆಂದು ಗ್ರಾಮಸ್ಥರಿಂದ ದೂರು ಬಂದಿದ್ದು, ಮಳೆಗಾಲ ಕಳೆದ ನಂತರ ಸರಿಪಡಿಸದಿದ್ದರೆ ನಿಮ್ಮಮೇಲೆ ಕ್ರಮ
ತೆಗೆದುಕೊಳ್ಳಬೇಕಾಗುತ್ತದೆ” – ಎಂದು ಇಂಜೀನಿಯರ್
ಕಂಟ್ರಾಕ್ಟರ್ಗೆ ಒಂದು ಪತ್ರ ಬರೆದು ಅದರ ನಕಲನ್ನು ನನಗೆ ಕಳಿಸಿದರು. ಕಂಟ್ರಾಕ್ಟರ್ ಕಡೆಯಿಂದಲೂ
ಮಳೆಗಾಲ ಕಳೆದ ನಂತರ ಸರಿಪಡಿಸಿಕೊಡುವ ಆಶ್ವಾಸನೆಯ ಪತ್ರ ಬಂತು. ಇಷ್ಟೆಲ್ಲಾ ಓದಿ ನೀವು – “ವಾವ್!!! ಆ ವರ್ಷ ಮಳೆಗಾಲ ಕಳೆದಕೂಡಲೇ ಕಂಟ್ರಾಕ್ಟರ್ ಬಂದು ರಸ್ತೆ
ಸರಿಮಾಡಿಕೊಟ್ಟರು ತಾನೇ” – ಎಂದು ಉದ್ಗಾರ
ತೆಗೆಯಬೇಡಿ. ಮಳೆಗಾಲ ಮುಗಿದು ನಾಲ್ಕೈದು ತಿಂಗಳುಗಳಾದನಂತರವೂ ಅವರದ್ದು ಜಾಣಮರೆವು!!! ಆ
ಜಾಣಮರೆವಿಗೆ ಔಷದಿಯಾಗಿ ಉಪಯೋಗಿಸಿದ್ದು ಮತ್ತೊಮ್ಮೆ ಮಾಹಿತಿಹಕ್ಕು ಕಾನೂನು!!! ಈ ಬಾರಿ ಕೇಳಿದ
ಮಾಹಿತಿ – ರಸ್ತೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯ ಸಂಪೂರ್ಣ ವಿವರ (ಟೆಂಡರ್ ಕರೆದ ದಿನಾಂಕ, ತೆರೆದ ದಿನಾಂಕ, ಭಾಗವಹಿಸಿದ್ದ
ಬಿಡ್ಡುದಾರರು, ಕೊಟ್ ಮಾಡಿದ ಬಿಡ್). ಚುರುಕು ಮುಟ್ಟಿತು. ಒಂದು ದಿನ (ನಾನು ಮನೆಯಲ್ಲಿರಲಿಲ್ಲ) ಕಂಟ್ರಾಕ್ಟರ್ ಹಾಗೂ
ಇಂಜೀನಿಯರ್ ನಮ್ಮಮನೆಯವರೆಗೂ ಬಂದು – “ಟಾರ್ ನ ಗುಣಮಟ್ಟ
ಕಡಿಮೆಯಿದ್ದುದರಿಂದ ಹಾಗಾಗಿದ್ದು” – ಎಂದು ಸ್ಪಷ್ಟೀಕರಣ
ನೀಡಿ (!!!) ಇನ್ನೊಂದು ಪದರ ಟಾರ್ ಹಾಕಿ ಸರಿಪಡಿಸುವುದಾಗಿ ಹೇಳಿದರು. ಒಂದೆರೆಡು ದಿನಗಳಲ್ಲೇ
ಮತ್ತೊಮ್ಮೆ ಲಾರಿ, ಬೇಬಿಜೆಲ್ಲಿ, ಟಾರ್
ಡ್ರಂಗಳು, ಟಾರ್ ಮತ್ತು ಜಲ್ಲಿ ಮಿಶ್ರಣಮಾಡುವ ಯಂತ್ರ, ರೋಡ್ ರೋಲರ್ ಹಾಗೂ ಕೆಲಸಗಾರರು –
ಇವರೆಲ್ಲರ ಆಗಮನವಾಯಿತು. ರಸ್ತೆಯನ್ನೊಮ್ಮೆ ಗುಡಿಸಿ – ಹೊಸದಾಗಿ ಬಿಸಿ ಟಾರ್ ಜಲ್ಲಿ ಮಿಶ್ರಣ
ಸುರಿದು – ಅದರಮೇಲೆ ರೋಡ್ ರೋಲರ್ ಓಡಿಸಿ – ರಸ್ತೆ ಸರಿಪಡಿಸಿದರು!!!! (ನಾಳೆ ನಮ್ಮೂರಿಗೆ ನೀವು ಬಂದಾಗ
– “ಎಲ್ಲಿ ಆ ಸೂಪರ್ ಸುಪ್ರಿಂ ರೋಡ್?” ಎಂದು ಕೇಳಿದರೆ – ಇದು ಎರಡೂವರೆ ವರ್ಷ ಹಿಂದಿನ ಕಥೆ. ಮೂರ್ನಾಲ್ಕು ತಿಂಗಳಲ್ಲೇ
ಹಾಳಾಗುವ ಬದಲು ಈಗ ಕಿತ್ತುಹೋಗಲು ಶುರುವಾಗಿದೆ!!!)
ಸ್ವಲ್ಪ
ಕಲ್ಪಿಸಿಕೊಳ್ಳೋಣ. ಮಾಹಿತಿ ಹಕ್ಕು ಎಂಬ ಕಾನೂನೇ ಇಲ್ಲದಿದ್ದರೆ? ಕಳಪೆ ರಸ್ತೆ ಕಾಮಗಾರಿ ದೂರುಕೊಡಲು
ನಾನು ಜಿಲ್ಲಾಪಂಚಾಯತ್ ಆಫೀಸಿಗೆ ಹೋಗುವುದು. “ಎಸ್ಟಿಮೆಶನ್ ಎಲ್ಲಿ ಸಿಗುತ್ತೆ?ಎಲ್ಲಿ ದೂರು ಕೊಡುವುದು?” – ಎಂದು ನಾನು ಕೇಳುವುದು!! ಕೇಳುತ್ತಿರುವಂತೆಯೇ (ಯಾವನೋ
ಒಬ್ಬ ಎಲ್ಲಾ ಸರಿಮಾಡುವವನು ಬಂದ – ಎಂಬಂತೆ ಆಶ್ಚರ್ಯ ಹಾಗು ಅಸಡ್ಡೆಯಿಂದ ನನ್ನನ್ನು ನೋಡುತ್ತಾ)
ಅಲ್ಲಿ ಕೂತ ಯಾವನೋ ಒಬ್ಬ ಸಿಬ್ಬಂದಿ – ಕಿಸಕ್ಕನೆ ನಗುತ್ತಾ – “ಸಾಹೇಬ್ರಿಲ್ಲ, ನಾಳೆ ಬನ್ನಿ” – ಎಂದು ಹೇಳುವುದು. ಯಾವ ಎಸ್ಟಿಮೆಶನ್ ಮಾಹಿತಿ ಹಕ್ಕು
ಕಾನೂನಿನ ಸಹಾಯದಿಂದ – ಇಪ್ಪತ್ತು ಮೂವತ್ತು ರೂಪಾಯಿಗೆ ನಮ್ಮ ಮನೆಬಾಗಿಲಿಗೆ ಬರುತ್ತದೋ – ಅದೇ
ಎಸ್ಟಿಮೆಶನ್ ಗೆ ಆ ಕಾನೂನು ಇಲ್ಲದಿದ್ದರೆ - ನಾವು ಎಷ್ಟೊಂದು ಕಷ್ಟಪಡಬೇಕಾಗುತ್ತಿತ್ತು ಅಲ್ವಾ.
ಎಲ್ಲರಿಗೂ
ಗೊತ್ತಿರುವ ಸತ್ಯವೇನೆಂದರೆ (ಹೆಚ್ಚಿನ ಎಲ್ಲಾ ಕಾಮಗಾರಿಗಳಲ್ಲಿ) ಕಾಮಗಾರಿಗೆಂದು ಬಿಡುಗಡೆಯಾಗುವ
ಹಣ ಸರಿಯಾದ ರೀತಿಯಲ್ಲಿ ಬಳಕೆಯಾಗಿರುವುದಿಲ್ಲ. ಕಾಮಗಾರಿಗಳನ್ನು ಕಾಟಾಚಾರಕ್ಕೆಮಾಡಿ ಇಂಜೀನಿಯರ್, ಕಂಟ್ರಾಕ್ಟರ್ ಹಾಗು (ಹೆಚ್ಚಿನ ಸಂದರ್ಭದಲ್ಲಿ) ರಾಜಕಾರಣಿ –
ಈ ಮೂರೂ ಜನ ಸೇರಿ ದುಡ್ಡು ಹೊಡೆಯುತ್ತಾರೆ. ಈ ಮೂರೂ ಜನರಲ್ಲಿ ರಾಜಕಾರಣಿ ಸ್ವಲ್ಪ ಸುರಕ್ಷಿತ.
ಅವರು ತಿಂದಿದ್ದು ಗೊತ್ತೇ ಆಗುವುದಿಲ್ಲ!!! (ಕಂಡಲ್ಲೆಲ್ಲಾ ನಮಸ್ಕಾರ ಮಾಡುವ ಸದಾ ನಯವಂತಿಕೆ
ಪ್ರದರ್ಶಿಸುವ ರಾಜಕಾರಣಿ (ಸಾದಾರಣವಾಗಿ) ದೊಡ್ಡ ಕಳ್ಳ ಆಗಿರುತ್ತಾನೆ). ಆದರೆ ಕಂಟ್ರಾಕ್ಟರ್
ಹಾಗೂ ಇಂಜೀನಿಯರ್ – ಒಬ್ಬ ಕಳಪೆ ಕಾಮಗಾರಿ ಮಾಡಿದವನು ಹಾಗೂ ಮತ್ತೊಬ್ಬ ‘ಅದು ಸರಿಯಿದೆ. ಹಣ ಮಂಜೂರು ಮಾಡಬಹುದು’ ಎಂದು ಸಹಿ ಹಾಕಿದವನು – ಇಬ್ಬರೂ ಅಂಜಿಕೆಯಿಂದಲೇ ಇರುತ್ತಾರೆ.
ಜನರಿಂದ ದೂರು ದಾಖಲಾಗಿ ಉನ್ನತ ತನಿಖೆಯಿಂದ ಕಾಮಗಾರಿ ಕಳಪೆಯೆಂದು ಸಾಬೀತಾದರೆ – ಕಂಟ್ರಾಕ್ಟರ್ ಕಪ್ಪು
ಪಟ್ಟಿಗೆ ಸೇರಿದರೆ – ಇಂಜೀನಿಯರ್ ಸಸ್ಪೆಂಡ್ ಆಗಿ ಮನೆಗೆ ಹೋಗುತ್ತಾರೆ. ಸರ್ಕಾರ ಕಾಮಗಾರಿಗಳಿಗೆ
ಲಕ್ಷಾಂತರ ರೂಪಾಯಿ ತೆಗೆದಿರಿಸಿ “ಹ್ಯಾಗಾದರೂ ಮಾಡು ರಾಜಾ” ಎಂದು ಹೇಳಿ ಕಂಟ್ರಾಕ್ಟರ್ ಕೈ ಮೇಲೆ ಹಾಕುವುದಿಲ್ಲ. ಗುಣಮಟ್ಟ ಕಾಪಾಡಲು ಇಂಜೀನಿಯರ್ ನೇಮಕ, ಹಾಗೂ ಗುಣಮಟ್ಟ ಕಳಪೆಯಾದರೆ ಅದನ್ನು ಸಾರ್ವಜನಿಕರು
ದೂರುಕೊಡುವ ವ್ಯವಸ್ಥೆ ಹಾಗೂ ತನಿಖೆ ಇದ್ದೇ ಇರುತ್ತದೆ. ಇಂಜೀನಿಯರ್ ಹಾಗೂ ಕಂಟ್ರಾಕ್ಟರ್ ಸೇರಿ –
ಕಳಪೆ ಕಾಮಗಾರಿ ಮಾಡಿ – ದುಡ್ಡು ನುಂಗಲು ಮುಖ್ಯ ಕಾರಣ – “ತಾವೇನು ಮಾಡಿದರೂ ನಡೆಯುತ್ತೆ. ಜನ ಗೊಣಗುಟ್ಟುತ್ತಾರೆಯೇ ವಿನಃ
(ಸರಿಯಾದ ಕ್ರಮದಲ್ಲಿ) ಕೆಳುವುದಿಲ್ಲ. (ಸರಿಯಾದ ಕ್ರಮದಲ್ಲಿ) ದೂರು ಕೊಡುವುದಿಲ್ಲ” – ಎಂಬ ಧೈರ್ಯ!!! ಜನರ ಪರವಾಗಿ ಪ್ರಶ್ನಿಸಬೇಕಾಗಿದ್ದ
ಜನಪ್ರತಿನಿದಿಯ ಕೈ ಬೆಚ್ಚಗೆ ಮಾಡಿ ಬುಟ್ಟಿಗೆ ಹಾಕಿಕೊಂಡ ಧೈರ್ಯ!!! ಜನ ಮಾಹಿತಿ ಹಕ್ಕು ಕಾನೂನು
ಉಪಯೋಗಿಸಿ ನನ್ನ ಕುತ್ತಿಗೆಗೆ ತರುತ್ತಾರೆ, ನಾನು ಸಸ್ಪೆಂಡ್ ಆಗಬಹುದು ಎಂಬ ಹೆದರಿಕೆಯೇ ಸಾಕು – ಅತೀ
ಕಳಪೆ ಕಾಮಗಾರಿಗೂ ಕಣ್ಮುಚ್ಚಿ ಇಂಜೀನಿಯರ್ ಸಹಿಹಾಕದಿರಲು!!! ಆದರೆ ಕೆಳುವರ್ಯಾರು? ಎಷ್ಟು ಜನ??
ಗ್ರಾಮಾಂತರ ಪ್ರದೇಶದಲ್ಲೂ ಇಂದು ಬದಲಾವಣೆಗಳಾಗಿವೆ. ಪ್ರತೀ ಚಿಕ್ಕ ಹಳ್ಳಿಗಳಲ್ಲೂ
ಧರ್ಮಸ್ಥಳ ಸಂಘ, ಸ್ವಸಹಾಯ ಸಂಘಗಳು, ಆ ಸಂಘ, ಈ ಸಂಘ – ಎಂದು ಹತ್ತಾರು ಸಂಘಗಳಿವೆ. ಯಾವುದೇ
ಕಾಮಗಾರಿ ಹಳ್ಳಿಗೆ-ಊರಿಗೆ ಮಂಜೂರಾದರೆ ಸಂಘದ ಪರವಾಗಿ ಯಾರಾದರೊಬ್ಬರು ಆ ಕಾಮಗಾರಿಯ ಎಸ್ಟಿಮೆಶನನ್ನು
ಮಾಹಿತಿ ಹಕ್ಕಿನ ಮೂಲಕ ತರಿಸಿ ಸ್ವಲ್ಪವಾದರೂ ಗಮನಿಸುತ್ತಿದ್ದಾರೆ ಕಾಮಗಾರಿಗಳು ಅಷ್ಟು
ಕಳಪೆಯಾಗಲಿಕ್ಕಿಲ್ಲವೆಂಬುವುದು ನನ್ನ ಅಭಿಪ್ರಾಯ. ಕಾಮಗಾರಿ ತುಂಬಾ ಕಳಪೆ ಮಾಡಿದರೆ ಜನ
ಪ್ರಶ್ನಿಸುತ್ತಾರೆ ಎಂಬ ಹೆದರಿಕೆ (ಸ್ವಲ್ಪವಾದರೂ) ಇಂಜೀನಿಯರ್ ಹಾಗೂ ಕಂಟ್ರಾಕ್ಟರ್ ಗಳಿಗೆ
ಇರುತ್ತದೆ. ಈ ಲೇಖನ ಓದಿದವರಲ್ಲಿ – ನೂರಕ್ಕೆ ಹತ್ತರಷ್ಟು ಜನರಾದರೂ – ನಾಲ್ಕೈದು ಜನ ಪರಿಚಯದ
ಜನರಿಗೆ ಅಥವಾ ಸಂಘದ ಸದಸ್ಯರಿಗೆ ಈ ವಿಷಯ ಹೇಳಿ – ಒಬ್ಬಿಬ್ಬರಾದರೂ (ಸಂಬಂದಪಟ್ಟ) ಮಾಹಿತಿ
ಕೇಳಿದರೂ – ನಾನು ಬರೆದ ಈ ಬರಹ ಸಾರ್ಥಕವೆಂಬುದು ನನ್ನಭಿಪ್ರಾಯ.
ಈ ಬರಹ ಮುಗಿಸುವ ಮೊದಲು ಒಂದು ಪ್ಯಾರಾವನ್ನು ಮಾಹಿತಿ ಹಕ್ಕು ಕಾನೂನು ವಿಷಯದಲ್ಲಿ ಹುಲಿಗಳಂತಿರುವ
ಇಬ್ಬರಬಗ್ಗೆ ನಿಮಗೆ ತಿಳಿಸಲು ಮೀಸಲಾಗಿಡಲು ಬಯಸುತ್ತೇನೆ. ಅವರೇ ಕೊಪ್ಪದ ಸಮೀಪದ ತಲಮಕ್ಕಿ
ಸುಬ್ರಮಣ್ಯ ಹಾಗೂ ಬಾಳೆಹೊನ್ನೂರು ಫೋಟೊ ಭಟ್ರು. ಕೊಪ್ಪಾ ಸಮೀಪ ತಲಮಕ್ಕಿ ಎಂಬ ಹಳ್ಳಿಯಲ್ಲಿರುವ
ಸುಬ್ರಮಣ್ಯ – ತಲಮಕ್ಕಿಯ ತಮ್ಮ ಹಳ್ಳಿಯಲ್ಲಿರುವ ಫೋನಿಗೆ – ಅದು ಕೊಪ್ಪಾ ಎಕ್ಸ್ಚೇಂಜ್ ನಿಂದ ಹೊರಟಿದ್ದಕ್ಕೆ
– ಬಿ.ಎಸ್.ಏನ್.ಎಲ್ ನವರು ಪಟ್ಟಣದ ಬಾಡಿಗೆ ಹಾಕುವುದಕ್ಕೆ ವಿರೋದಿಸಿ (ಗ್ರಾಮಾಂತ ಎಕ್ಸ್ಚೇಂಜ್
ಹಾಗೂ ಪಟ್ಟಣದ ಎಕ್ಸ್ಚೇಂಜ್ ಫೋನ್ ಗಳಲ್ಲಿ ಬಾಡಿಗೆಯಲ್ಲಿ ತುಂಬಾ ವ್ಯತ್ಯಾಸವಿದೆ) ಹೋರಾಡಿ
ಗೆದ್ದವರು!!! ಇನ್ನು ಬಾಳೆಹೊನ್ನೂರಿನ (ಆರ್.ಟಿ.ಓ ಏಜೆಂಟ್!!!) ಫೋಟೊ ಭಟ್ರು. ಹೆಗಲಿಗೊಂದು
ಜೋಳಿಗೆ ಹಾಕಿಕೊಂಡು ಭಟ್ರು ಶೂನ್ಯದೆಡೆ ನೋಡುತ್ತಾ ಸಿಗರೆಟ್ ಹಚ್ಚಿ ಧಂ ಎಳೆದರೆಂದರೆ ಯಾವುದೋ
ಮಾಹಿತಿ ಕೇಳಲು ಸ್ಕೆಚ್ ಹಾಕುತ್ತಿದ್ದಾರೆಂದೇ ಅರ್ಥ. ಜನಜಾಗೃತಿಗೆ ಸಂಬಂದಿಸಿದ ಸಂಘವೊಂದರ
ಸದಸ್ಯರೂ ಆಗಿರುವ ಭಟ್ಟರು ಮಾಹಿತಿ ಹಕ್ಕು ಕಾನೂನು ಉಪಯೋಗಿಸಿ ಅನೇಕ ಅವ್ಯವಹಾರಗಳನ್ನು
ಬಯಲಿಗೆಳೆದಿದ್ದಾರೆ. ಕೆನರಾ ಬ್ಯಾಂಕ್ ಚಿನ್ನದ ನಾಣ್ಯ ಪ್ರಕರಣದಲ್ಲಿ – ಇವರು ಕೇಳಿದ ನಾಲ್ಕು
ಮಾಹಿತಿ ನೀಡದೆ ಸತಾಯಿಸಿದ ಬ್ಯಾಂಕ್ ಅಧಿಕಾರಿ – ೨೫೦೦೦ ರೂಪಾಯಿ ದಂಡ ಕಟ್ಟಬೇಕಾಯಿತು!!!
(ಕೇಂದ್ರ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿ – ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ –
ಅಧಿಕಾರಿ, ಇವರು ಹಾಗೂ ಕೇಂದ್ರ ಮಾಹಿತಿ ಆಯೋಗ (ದೆಹಲಿ) ಇವರ
ನಡುವೆ ವೀಡಿಯೋ ಕಾನ್ಫಾರೆನ್ಸ್ ನಡೆದು ಬಗೆಹರಿದ ಘಟನೆ ಇದು)
ವಿಶೇಷ ಸೂಚನೆ :- ಈ ಬರಹ ಓದಿ ಸ್ಪೂರ್ತಿಹೊಂದಿ ಒಂದಿಷ್ಟು ಮಾಹಿತಿ ಕೇಳೋಣ ಎಂದು ಹೊರಟವರು
ನೀವಾಗಿದ್ದರೆ – ಚಿಕ್ಕ (ಆದರೆ ಬೆಲೆಕಟ್ಟಲಾಗದ) ಸಲಹೆ - ಎಳ್ಳಷ್ಟೂ ಸಂಬಂದವಿಲ್ಲದ, ಕೇವಲ ಅಧಿಕಾರಿಗಳಿಗೆ ಕಿರುಕುಳ ಕೊಡುವ ಒಂದೇ
ಉದ್ದೇಶವಿಟ್ಟುಕೊಂಡು ಅನವಶ್ಯಕ ಮಾಹಿತಿಗಳನ್ನ ದಯವಿಟ್ಟು ಕೇಳಬೇಡಿ. (ಅದರಲ್ಲೂ ಪೋಲಿಸ್ ಇಲಾಖೆಯ
ಬಗ್ಗೆ). “ಯಾಕೆ?
ಏನಾಗುತ್ತೆ??” –
ಎಂಬುವುದು ನಿಮ್ಮ ಪ್ರಶ್ನೆಯಾಗಿದ್ದರೆ – ಅದಕ್ಕೆ ನನ್ನ ಉತ್ತರ – ಇಲ್ಲದಸಲ್ಲದ ಮಾಹಿತಿಗಳನ್ನು
ಬೇರೆಬೇರೆ ಇಲಾಖೆಗಳಲ್ಲಿ ಕೇಳಿ ಪರಿಪಾಟಲು ಪಟ್ಟ ನನ್ನ ಸ್ನೇಹಿತನೊಬ್ಬನ ಕಥೆ – ನನ್ನ
ಬ್ಲಾಗಿನಲ್ಲೇ ಮುಂದೊಂದುದಿನ ಬರೆಯುತ್ತೇನೆ.
(ಈ ಬರಹದ
ಬಗ್ಗೆ ನಿಮ್ಮ ಅಭಿಪ್ರಾಯಗಳಿಗೆ ಸದಾ ಸ್ವಾಗತ. ನಿಮ್ಮನಿಸಿಕೆಗಳು ನಮ್ಮ (ಮುಂದಿನ) ಬರಹಗಳನ್ನ
ಸರಿಪಡಿಸುವ ಔಷಧ. ಬರಹ ಇಷ್ಟವಾಗಿ ಕಾಮೆಂಟ್ ಬರೆಯಲು ಪುರುಸೊತ್ತು ಸಿಗದಿದ್ದರೆ ಈ ಕೆಳಗಿರುವ +1 ರ ಮೇಲೆ ಕ್ಲಿಕ್ ಮಾಡಬಹುದು. ಫೇಸ್ ಬುಕ್ ನಲ್ಲಿ ಶೇರ್
ಮಾಡಿದರೆ ಹತ್ತಾರು ಜನರಿಗೆ ತಲುಪಿ, ಮೂರ್ನಾಲ್ಕು ಜನರಾದರೂ ಮಾಹಿತಿ ಕೇಳುವ ಮನಸ್ಸುಮಾಡಿ, ಒಂದಿಬ್ಬರಾದರೂ ಮಾಹಿತಿ ಕೇಳಿ ಒಂದಿಷ್ಟು ಉಪಯೋಗವಾದರೆ ನನ್ನ
ಈ ಬರಹ ಸಾರ್ಥಕ)
.